Advertisement

ಅಂಗನವಾಡಿ ಕೇಂದ್ರಕ್ಕೆ ಜಿಪಂ ಅಧ್ಯಕ್ಷ‌ರ ದಿಢೀರ್‌ ಭೇಟಿ

04:11 PM Feb 17, 2017 | |

ಚಿಕ್ಕಬಳ್ಳಾಪುರ: ತಾಲೂಕಿನ ಕೋರೇನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಗುರುವಾರ ಅನಿರೀಕ್ಷಿತ ಭೇಟಿ ನೀಡಿದ ಜಿಪಂ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ.ಮಂಜುನಾಥ ನೇತೃತ್ವದ ಅಧಿಕಾರಿಗಳ ತಂಡ, ಕೇಂದ್ರದ ಮೂಲ ಸೌಕರ್ಯಗಳನ್ನು ಪರಿಶೀಲಿಸಿತು.

Advertisement

ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆಯ ಜೊತೆಗೆ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಕಳಪೆ ಗುಣಮಟ್ಟದ ಆಹಾರ ವಿತರಿಸಲಾಗುತ್ತಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ ನೇತೃತ್ವದಲ್ಲಿ ಜಿಪಂ ಹಿರಿಯ ಅಧಿಕಾರಿಗಳ ತಂಡ ಕೋರೇನಹಳ್ಳಿ ಅಂಗನವಾಡಿ ಕೇಂದ್ರಕ್ಕೆ ದಿಢೀರ್‌ ಭೇಟಿ ನೀಡಿತ್ತು.

ದಾಖಲೆಗಳ ಪರಿಶೀಲನೆ: ಈ ವೇಳೆ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ವಿತರಣೆ ಮಾಡಲು ಸರಬರಾಜಾಗಿರುವ ಪೌಷ್ಟಿಕ ಆಹಾರದ ಪ್ಯಾಕೇಟ್‌ಗಳ ದಾಸ್ತಾನು ಕುರಿತ ಸ್ಟಾಕ್‌ಬುಕ್‌ ಹಾಗೂ ಆಹಾರ ಪದಾರ್ಥಗಳ ಗುಣಮಟ್ಟವನ್ನು ತಂಡ ಪರಿಶೀಲಿಸಿತು. ಅಂಗನವಾಡಿ ವ್ಯಾಪ್ತಿಯಲ್ಲಿರುವ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಕಾಲಕಾಲಕ್ಕೆ ಪೌಷ್ಟಿಕ ಆಹಾರ ವಿತರಿಸಬೇಕು. ಕಡ್ಡಾಯವಾಗಿ ಪೌಷ್ಟಿಕ ಆಹಾರ ಪಡೆದ ಫ‌ಲಾನುಭವಿಗಳಿಂದ ಸಹಿ ಪಡೆದುಕೊಳ್ಳಬೇಕೆಂದು ಅಂಗನವಾಡಿ ಕಾರ್ಯಕರ್ತೆಗೆ ಜಿಪಂ ಅಧಿಕಾರಿಗಳು ಸೂಚಿಸಿದರು.

ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ: ಇದೇ ವೇಳೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೋರೇನಹಳ್ಳಿ ಅಂಗನವಾಡಿ ಕೇಂದ್ರಕ್ಕೆ ನೂತನವಾಗಿ ನಿರ್ಮಿಸಲಾಗಿರುವ ಕಾಂಪೌಂಡ್‌, ಕಾಲುವೆ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸ್ವತ್ಛ ಭಾರತ ಮಿಷನ್‌ ಯೋಜನೆಯಡಿ ನಿರ್ಮಿಸಲಾಗಿರುವ ಶೌಚಾಲಯಗಳ ಕಟ್ಟಡದ ಗುಣಮಟ್ಟವನ್ನು ತಂಡ ಪರಿಶೀಲಿಸಿತು. ಗ್ರಾಮದ ನೈರ್ಮಲ್ಯಕ್ಕಾಗಿ ಹಾಗೂ ಬಯಲು ಬಹಿರ್ದೆಸೆ ಮುಕ್ತ ಗ್ರಾಮವಾಗಿಸಲು ಪ್ರತಿಯೊಂದು ಮನೆಗೂ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಗ್ರಾಮಸ್ಥರಲ್ಲಿ ಅರಿವು ಮೂಡಿಸುವಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಲಾಯಿತು.

ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ: ಅಂಗನವಾಡಿ ಪರಿಶೀಲನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಪಂ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ, ಜಿಲ್ಲೆಯಲ್ಲಿ ಸ್ವಂತ ಕಟ್ಟಡ ಇಲ್ಲದ ಅಂಗನವಾಡಿ ಕೇಂದ್ರಗಳಿಗೆ ಶೀಘ್ರದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಿಸಿಕೊಡಲಾಗುವು ಎಂದು ಹೇಳಿದರು. 

Advertisement

ಪ್ರಾಥಮಿಕ ಶಾಲೆಗಳಲ್ಲೂ ಕಟ್ಟಡ ನಿರ್ಮಾಣ: ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಸ್ವಂತ ಕಟ್ಟಡ ಹಾಗೂ ನಿವೇಶನ ಇಲ್ಲದ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಕಟ್ಟಡಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಉದ್ಯೋಗ ಖಾತ್ರಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಅಂಗನವಾಡಿ ಕೇಂದ್ರಗಳಿಗೆ ಕಟ್ಟಡ, ಕಾಂಪೌಂಡ್‌ ಹಾಗೂ ಸ್ವತ್ಛ ಭಾರತ ಯೋಜನೆಯಡಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನಿವೇಶನದ ಕೊರತೆ ಇರುವ ಕಡೆ ಪ್ರಾಥಮಿಕ ಶಾಲೆಗಳ ಆವರಣಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಡಾ.ಸಿ.ಸಿದ್ದರಾಮಯ್ಯ, ಮುಖ್ಯ ಲೆಕ್ಕಾಧಿಕ್ಷಕ ಡಾ.ಎಂ.ಎಚ್‌.ನಾಗೇಶ್‌ ಸೇರಿದಂತೆ ಜಿಪಂ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಸ್ಥಳೀಯ ಗ್ರಾಪಂ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಪೌಷ್ಟಿಕ ಆಹಾರ ಗುಣಮಟ್ಟದಿಂದ ಕೂಡಿರಬೇಕು. ಈ ಬಗ್ಗೆ ಗುತ್ತಿಗೆದಾರರು ಬೇಜವಾಬ್ದಾರಿ ತೋರಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಂಗನವಾಡಿ ಕೇಂದ್ರಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಏನೇ ತೊಂದರೆಯಾದರೂ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು.
-ಪಿ.ಎನ್‌.ಕೇಶವರೆಡ್ಡಿ, ಜಿಪಂ ಅಧ್ಯಕ್ಷರು 

Advertisement

Udayavani is now on Telegram. Click here to join our channel and stay updated with the latest news.

Next